ಸಮಸ್ಯೆಗಳಿಗೆ ಪರಿಹಾರ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಖಡಕ್ ವಾರ್ನಿಂಗ್
ಬೀದರ್ (ಜ.21): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ – ಹಳ್ಳಿ ಕಡೆ (ಗ್ರಾಮ ವಾಸ್ತವ್ಯ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಭೆಯಲ್ಲಿ ನೀಡುವ ಪ್ರತಿಯೊಂದು ಆಶ್ವಾಸನೆಗಳನ್ನು ನೋಟ್ ಮಾಡಿಕೊಳ್ಳಬೇಕು, ಜನರು ನೀಡುವ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಪರಿಹಾರ ಒದಗಿಸಬೇಕೆಂದು ಸೂಚಿಸಿದರು.
ಬೇಮಳಖೇಡ ಅಪಘಾತ ದುರಂತದಲ್ಲಿ ಗಾಯಗೊಂಡವರಿಗೆ ಕೂಡಲೇ ಪರಿಹಾರ ಒದಗಿಸುವಂತೆ ನಾನು ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ. ಆದರೆ ಇದುವರೆಗೂ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ದೊರೆತಿಲ್ಲ. ಈಗ ನೀಡುತ್ತಿರುವ ನೂರು ದಿನಗಳ ಉದ್ಯೋಗ ಖಾತ್ರಿ ಕೆಲಸದ ದಿನಗಳು ಸಾಕಾಗುತ್ತಿಲ್ಲ. ನೂರು ದಿನಗಳ ಅವಧಿ ಪೂರೈಸಿದವರಿಗೆ ಹೆಚ್ಚುವರಿ ಕೆಲಸ ನೀಡುವಂತೆ ನಾನು ಕೂಡ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಅಧಿವೇಶನದಲ್ಲಿ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದೇನೆ.
ಸಭೆಯಲ್ಲಿ ಸಲ್ಲಿಕೆಯಾಗಿರುವ ಜನರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ರಸ್ತೆ ಸಮಸ್ಯೆ, ನೀರಿನ ಸಮಸ್ಯೆಗಳನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವ ಕೆಲಸ ಮಾಡುತ್ತೇನೆ. ಜನರು ನಮಗೆ ಮನೆ ಇಲ್ಲ ಮನೆ ಕಟ್ಟಿಸಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದು ಐದು ವರ್ಷವಾದ್ರು ಸರ್ಕಾರದಿಂದ ಇದುವರೆಗೂ ನಮಗೆ ಒಂದೇ ಒಂದು ಮನೆ ಮಂಜೂರು ಆಗಿಲ್ಲ. ನಾವು ಜನರಿಗೆ ಏನು ಉತ್ತರ ಹೇಳ್ಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿಟಗುಪ್ಪಾ ತಹಶಿಲ್ದಾರ ರವೀಂದ್ರ ಧಾಮಾ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಪಾಷಾ, ಉಡಮನಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್ ಎಲ್ ಚಾಂಗಲೇರಾ, ಅಧ್ಯಕ್ಷ ಸಂತೋಷ ಎನ್ ಚೌಕಿ, ಉಪಾಧ್ಯಕ್ಷೆ ನಿಲಾವತಿ ವಿ ಪಾಟೀಲ್, ವೀರಶೆಟ್ಟಿ ಪಾಟೀಲ್, ಮಾರುತಿ ಜಾಬನೂರ, ದೇವೇಂದ್ರ ಬೊಸ್ಲೆ, ವಿಠಲರೆಡ್ಡಿ, ನಸೀಮ್ ಅಹಮದ್, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…
















